Monday, June 10, 2013

ಕಂಡೆ ಕಂಡೆ ಸ್ವಾಮಿಯ ಬೇಡಿಕೊಂಡೆ


ಕಂಡೆ ಕಂಡೆ ಸ್ವಾಮಿಯ ಬೇಡಿಕೊಂಡೆ ||
ಕಂಡೆ ತಿರುಪತಿ ವೆಂಕಟೇಶನ ಕಾರಣಾತ್ಮಕ ಸಾರ್ವಭೌಮನ
ಕಾಮಿತಾರ್ಥಗಳೀವ ದೇವನ ಕರುಣಾನಿಧಿ ಎಂದೆನಿಸಿ ಮೆರೆವನ ||

ಕೋಟಿಸೂರ್ಯ ಪ್ರಕಾಶವೆನಿಪ ಕಿರೀಟವನು ಮಸ್ತಕದಿ ಕಂಡೆನು
ನೋಟಕಾಶ್ಚರ್ಯವಾದ ನಗೆಮುಖನೊಸಲಿನಲಿ ತಿರುಮಣಿಯ ಕಂಡೆನು
ಸಾಟಿಯಿಲ್ಲದೆ ಚತುರ ಹಸ್ತದಿ ಶಂಖಚಕ್ರಗದಾಬ್ಜ ಕಂಡೆನು
ಬೂಟಕದ ಮಾತಲ್ಲ ಕೇಳಿರೋ ಭೂರಿದೈವರ ಗಂಡನಂಘ್ರಿಯ||

ತಪ್ಪುಕಾಣಿಕೆ ಕಪ್ಪವನು ಸಮಸ್ತದ್ವೀಪಗಳಿಂದಲಿ ತರಿಸುವ
ಉಪ್ಪು ಓಗರಗಳನೆ ಮಾರಿಸಿ ಉಚಿತದಿಂದಲಿ ಹಣವ ಗಳಿಸುವ
ಇಪ್ಪತ್ತು ದುಡ್ಡಿಗೆ ಸೇರು ತೀರ್ಥ ಒಪ್ಪದಲಿ ಕ್ರಯ ಮಾಡಿ ಕೊಡಿಸುವ
ಸರ್ಪಶಯನ ಸಾರ್ವಭೌಮನ ಅಪ್ಪ ವೆಂಕಟರಮಣನಂಘ್ರಿಯ ||

ಉರದಿ ಶ್ರೀ ದೇವಿಯಳ ಕಂಡೆನು ಉನ್ನತದ ಕೌಸ್ತುಭವ ಕಂಡೆನು
ಗರುಡ ಕಿನ್ನರನಾರದಾದಿ ಗಂಧರ್ವರ ಎಡಬಲದಲಿ ಕಂಡೆನು
ತರತರದಿ ಭಕ್ತರಿಗೆ ವರಗಳ ಕರೆದು ಕೊಡುವುದ ನಿರತ ಕಂಡೆನು
ಶರಧಿಶಯನನ ಶೇಷಗಿರಿಯ ವರದ ಪುರಂದರವಿಠಲನಂಘ್ರಿಯ ||

No comments:

Post a Comment